ಈರುಳ್ಳಿ ಬೆಳೆ ಇಳಿಕೆ ಸಾಧ್ಯತೆ
ಈರುಳ್ಳಿ ಬೆಳೆಯುವ ಪ್ರಮುಖ ರಾಜ್ಯಗಳಲ್ಲಿ ಅತಿಯಾದ ಮಳೆ ಆಗಿರುವುದರಿಂದ ಮುಂಗಾರು ಹಂಗಾಮಿನಲ್ಲಿ ಈರುಳ್ಳಿ ಉತ್ಪಾದನೆಯು ಶೇ 14ರಷ್ಟು ಇಳಿಕೆ ಆಗುವ ಸಾಧ್ಯತೆ ಇದೆ ಎಂದು ಆಹಾರ ಇಲಾಖೆ ಕಾರ್ಯದರ್ಶಿ ಸುಧಾಂಶು ಪಾಂಡೆ ಹೇಳಿದ್ದಾರೆ.
ಈ ಬಾರಿ 43 ಲಕ್ಷ ಟನ್ ಈರುಳ್ಳಿ ಉತ್ಪಾದನೆ ಆಗುವ ಅಂದಾಜು ಮಾಡಲಾಗಿತ್ತು. ಆದರೆ, ಮಹಾರಾಷ್ಟ್ರ, ಕರ್ನಾಟಕ ಮತ್ತು ಮಧ್ಯಪ್ರದೇಶದಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಆಗುತ್ತಿರುವುದರಿಂದ ಈರುಳ್ಳಿ ಉತ್ಪಾದನೆಯು 37 ಟನ್ಗಳಿಗೆ ಇಳಿಕೆ ಆಗುವ ಸಾಧ್ಯತೆ ಇದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಕೇಂದ್ರ ಸರ್ಕಾರವು ರಾಜ್ಯಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಪೂರೈಕೆ, ಬೇಡಿಕೆ ಮತ್ತು ಬೆಲೆ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದೂ ಅವರು ಹೇಳಿದ್ದಾರೆ.
ಕೆಲವು ಪ್ರದೇಶಗಳಲ್ಲಿ ಈರುಳ್ಳಿ ಚಿಲ್ಲರೆ ಮಾರಾಟ ದರ ಕೆ.ಜಿಗೆ ₹75ಕ್ಕಿಂತಲೂ ಹೆಚ್ಚಿಗೆ ಇದೆ. ಕೆಲವು ನಗರಗಳಲ್ಲಿ ಗರಿಷ್ಠ ₹100ರವರೆಗೂ ತಲುಪಿದೆ.
